For the best experience, open
https://m.suddione.com
on your mobile browser.
Advertisement

ಸೆಪ್ಟೆಂಬರ್ 12 ರಂದು ಒಳ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ತಮಟೆ ಚಳವಳಿ : ಗುರುಮೂರ್ತಿ

05:07 PM Aug 30, 2024 IST | suddionenews
ಸೆಪ್ಟೆಂಬರ್ 12 ರಂದು ಒಳ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ತಮಟೆ ಚಳವಳಿ   ಗುರುಮೂರ್ತಿ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 30 : ಸುಪ್ರೀಂಕೋರ್ಟ್ ಹೊರಡಿಸಿರುವ ಐತಿಹಾಸಿಕ ಮಹತ್ವದ ತೀರ್ಪಿನನ್ವಯ ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಕೂಡಲೆ ಜಾರಿಗೊಳಿಸುವಂತೆ ಸೆ.12 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತಮಟೆ ಚಳುವಳಿ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಮೂರ್ತಿ ತಿಳಿಸಿದರು.

Advertisement

ಕ್ರೀಡಾ ಭವನದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದರು.

Advertisement

1995 ರಲ್ಲಿ ಪ್ರೊ.ಬಿ.ಕೃಷ್ಣಪ್ಪ ಒಳ ಮೀಸಲಾತಿಗಾಗಿ ಮೊಟ್ಟ ಮೊದಲು ಧ್ವನಿ ಎತ್ತಿದರು. ಅಂದಿನಿಂದ ಇಂದಿನತನಕ ಹೋರಾಟ ನಡೆಯುತ್ತಲೆ ಇದೆ. ಪರಿಶಿಷ್ಟ ಜಾತಿಯಲ್ಲಿ ಉಪ ಜಾತಿಗಳಿಗೆ ಒಳ ಮೀಸಲಾತಿಯನ್ನು ಅನುಷ್ಟಾನಗೊಳಿಸಬೇಕೆಂದು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹೋರಾಟ ನಡೆಸಿ ಮಂತ್ರಿ ಮತ್ತು ಶಾಸಕರುಗಳಿಗೆ ಮನವರಿಕೆ ಮಾಡಿಕೊಡಬೇಕಿದೆ. ಮನೆ ಮನೆಗೆ ಕರಪತ್ರಗಳನ್ನು ವಿತರಿಸಿ ಒಳ ಮೀಸಲಾತಿ ಕುರಿತು ದಲಿತರನ್ನು ಜಾಗೃತಿಗೊಳಿಸೋಣ ಎಂದರು.

ಆಂಧ್ರದಲ್ಲಿ ಚಿನ್ನಯ್ಯ 2005 ರಲ್ಲಿ ಒಳ ಮೀಸಲಾತಿಗಾಗಿ ಹೋರಾಟ ಆರಂಭಿಸಿ ನ್ಯಾಯಾಲಯಕ್ಕೆ ಮೊರೆ ಹೋದಾಗ ಅಂದಿನ ನ್ಯಾಯಾಧೀಶರಾಗಿದ್ದ ಸಂತೋಷ್ ಹೆಗ್ಡೆ ಸಂವಿಧಾನಬದ್ದವಾಗಿ ಪರಿಶಿಷ್ಟ ಜಾತಿಯಲ್ಲಿನ ಉಪ ಜಾತಿಗಳಿಗೆ ಮೀಸಲಾತಿ ನೀಡಲು ಅಧಿಕಾರವಿಲ್ಲದ ಕಾರಣ ರಾಜ್ಯ ಸರ್ಕಾರಕ್ಕೂ ಈ ಸಂಬಂಧ ಅಧಿಕಾರವಿರುವುದಿಲ್ಲ ಎಂದು ತೀರ್ಪು ನೀಡಿದರು. ಅಂದಿನಿಂದ ತಮಿಳುನಾಡು, ಪಂಜಾಬ್, ಕರ್ನಾಟಕ ಸೇರಿದಂತೆ ದೇಶದ ನಾನಾ ರಾಜ್ಯಗಳಲ್ಲಿ ಒಳ ಮೀಸಲಾತಿಗಾಗಿ ಹೋರಾಟ ಶುರುವಾಯಿತು ಎಂದು ಹೇಳಿದರು.

ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ ಪರಿಶಿಷ್ಟ ಜಾತಿಯಲ್ಲಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಕೊಡುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎನ್ನುವ ಸಂವಿಧಾನಾತ್ಮಕ ತೀರ್ಪು ನೀಡಿರುವುದರಿಂದ ಮುಂದಿನ ತಿಂಗಳು ರಾಜ್ಯಾದ್ಯಂತ ತಮಟೆ ಚಳುವಳಿ ನಡೆಸಿ ಮೈಮರೆತು ಮಲಗಿರುವ ರಾಜ್ಯ ಸರ್ಕಾರವನ್ನು ಎಚ್ಚರಿಸಲಾಗುವುದು. ಎಂತಹುದೆ ಹೋರಾಟಕ್ಕೆ ದಲಿತರು ಸಿದ್ದರಿರಬೇಕೆಂದು ಗುರುಮೂರ್ತಿ ಕರೆ ನೀಡಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದಲೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒಳ ಮೀಸಲಾತಿ ಜಾರಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ. ಶತಶತಮಾನಗಳಿಂದಲೂ ಶೋಷಣೆ, ಹಿಂಸೆ, ದೌರ್ಜನ್ಯ, ಬಹಿಷ್ಕಾರವನ್ನು ಅನುಭವಿಸಿಕೊಂಡು ಬರುತ್ತಿರುವ ದಲಿತರು ಸಮಾಜದ ಮುಖ್ಯವಾಹಿನಿಗೆ ಬರಬೇಕಾಗಿರುವುದರಿಂದ ರಾಜ್ಯ ಸರ್ಕಾರ ವಿಳಂಭ ಮಾಡದೆ ಒಳ ಮೀಸಲಾತಿಯನ್ನು ಜಾರಿಗೆ ತರಬೇಕು. ಇಲ್ಲದಿದ್ದರೆ ಜನಪ್ರತಿನಿಧಿಗಳನ್ನು ತಡೆದು ಘೇರಾವ್ ಹಾಕಿ ಪ್ರತಿಭಟಿಸಲಾಗುವುದೆಂದು ಎಚ್ಚರಿಸಿದರು.

ವಿಜಯನಗರ ದಲಿತ ಸಂಘರ್ಷ ಸಮಿತಿ ಸಂಚಾಲಕ ಎಸ್.ದುರುಗೇಶ್ ಮಾತನಾಡುತ್ತ ಸರ್ಕಾರ ಸದಾಶಿವ ಆಯೋಗದ ವರದಿ, ಮಾಧುಸ್ವಾಮಿ ಆಯೋಗದ ವರದಿ ಇವೆರಡರಲ್ಲಿ ಯಾವುದನ್ನು ಜಾರಿ ಮಾಡುತ್ತದೋ ಎನ್ನುವ ಗೊಂದಲವಿದೆ. ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿ ಮಾಧುಸ್ವಾಮಿ ಆಯೋಗದ ವರದಿಯನ್ನು ಕೇಂದ್ರಕ್ಕೆ ಕಳಿಸಿದೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರತಿ ಪಡೆದು ಅಂತಿಮ ತೀರ್ಪಿನ ಬಗ್ಗೆ ಶಿಬಿರ ಏರ್ಪಡಿಸಿ ಕಾನೂನು ತಜ್ಞರ ಜೊತೆ ಚರ್ಚಿಸಬೇಕೆಂದು ಸಭೆಯಲ್ಲಿ ಸಲಹೆ ನೀಡಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟನಾ ಸಂಚಾಲಕರುಗಳಾದ ಹನುಮಂತಪ್ಪ ಕಾಕರ್‍ಗಲ್, ಗಂಗಾಧರ ಚಿಕ್ಕಬಳ್ಳಾಪುರ, ರಮೇಶ್ ಮಾದರ್ ಬೆಳಗಾವಿ, ಬಸವರಾಜ್, ದಾವಣಗೆರೆ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್, ಶಿವಮೊಗ್ಗ ಜಿಲ್ಲಾ ಸಂಚಾಲಕ ಎಂ.ಏಳುಕೋಟಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ
ಹೇಮ, ಲಾವಣ್ಯ ವೇದಿಕೆಯಲ್ಲಿದ್ದರು.

Tags :
Advertisement