Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿಕ್ಕಾಲಘಟ್ಟದಲ್ಲಿ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸೆ : ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

05:56 PM Jun 19, 2024 IST | suddionenews
Advertisement

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ. ಶೀಘ್ರದಲ್ಲೇ ಶುದ್ಧ ನೀರಿನ ಘಟಕವನ್ನು ಸ್ಥಾಪಿಸಿ, ಕಾರ್ಯಾರಂಭ ಮಾಡಲಾಗುವುದು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ನೀಡಿದರು.

Advertisement

ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಹೋಬಳಿ ಆಲಘಟ್ಟ ಗ್ರಾ.ಪಂ ವ್ಯಾಪ್ತಿಯ ಚಿಕ್ಕಾಲಘಟ್ಟ ಗ್ರಾಮದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಲಾದ "ತಾಲ್ಲೂಕು ಮಟ್ಟದ ಜನ ಸ್ಪಂದನಾ" ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಚಿತ್ರದುರ್ಗ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ 158 ಹಳ್ಳಿಗಳಿಗೆ ಮಾರಿ ಕಣಿವೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆ ವ್ಯಾಪ್ತಿಯಲ್ಲಿ ಚಿಕ್ಕಾಲಘಟ್ಟ ಗ್ರಾಮ ಸೇರ್ಪಡೆಯಾಗಿರಲಿಲ್ಲ. ತದನಂತರದಲ್ಲಿ ಒತ್ತಾಯಪೂರ್ವಕವಾಗಿ ಚಿಕ್ಕಾಲಘಟ್ಟ ಗ್ರಾಮವನ್ನೂ ಯೋಜನಾ ವ್ಯಾಪ್ತಿಗೆ ಸೇರಿಸಲು ಕ್ರಮ ಕೈಗೊಂಡಿದ್ದೇನೆ. ಗ್ರಾಮದ ಸರ್ಕಾರಿ ಶಾಲೆ ಮುಚ್ಚುವ ಹಂತದಲ್ಲಿತ್ತು. ಇದನ್ನು ತಪ್ಪಿಸಿ ಶಾಲೆಯನ್ನು ಉಳಿಸಲಾಗಿದೆ. ಚಿಕ್ಕಾಲಘಟ್ಟ ಗ್ರಾಮವನ್ನು ಗಣಿ ಭಾದಿತ ಪ್ರದೇಶದ ವ್ಯಾಪ್ತಿಗೆ ಸೇರಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ. ಇದನ್ನು ಆದ್ಯತೆಯಾಗಿ ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಗ್ರಾಮಕ್ಕೆ ಮನೆಗಳು ಮಂಜೂರಾಗಲಿವೆ. ಗ್ರಾಮ ಸಭೆ ನಡೆಸಿ ಅರ್ಹ ಫಲಾನುಭವಿಗಳಿಗೆ ಮನೆ ಹಂಚುವ ಕಾರ್ಯ ಮಾಡಲಾಗುವುದು ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದರು.

Advertisement

ಗ್ರಾಮದ ದೇವಾಲಯಗಳಿಗೆ ರೂ.10 ಲಕ್ಷ ಅನುದಾನ:  ಗ್ರಾಮದ ಈಶ್ವರ ದೇವಸ್ಥಾನ ಹಾಗೂ ದುರ್ಗಾಂಭ ದೇವಾಲಯಗಳ ಜೀರ್ಣೋದ್ಧಾರಕ್ಕೆ ಮುಜರಾಯಿ ಇಲಾಖೆಯಿಂದ ತಲಾ ರೂ.5 ಲಕ್ಷದಂತೆ ಒಟ್ಟು ರೂ.10 ಲಕ್ಷ ಅನುದಾನ ಒದಗಿಸಲಾಗಿದೆ. ಗ್ರಾಮದ ಸಿ.ಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ರೂ.15 ಲಕ್ಷ ಅನುದಾನ ಒದಗಿಸಿದ್ದು. ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದರು.

ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಮಾತನಾಡಿ, ಇಡೀ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ತಮ್ಮ ಗ್ರಾಮಕ್ಕೆ ಆಗಮಿಸಿ, ಸಮಸ್ಯೆ ಅಹವಾಲುಗಳನ್ನು ಆಲಿಸಿದೆ. ನಿಗದಿತ ಸಮಯದೊಳಗೆ ಈ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಲಾಗುವುದು. ಕುರಿತು ಅರ್ಜಿಯೊಂದಿಗೆ ನೀವು ನೀಡಿರುವ ಮೊಬೈಲ್ ನಂಬರ್‍ಗೆ ಸಮಸ್ಯೆ ಪರಿಷ್ಕರದ ಹಂತದ ಕುರಿತು ಸಂದೇಶವನ್ನು ಕಳುಹಿಸಿಕೊಡಲಾಗುವುದು. ಸರ್ಕಾರದ ಜನಪರ ಆಡಳಿತದ ಪರಿಣಾಮವಾಗಿ ಜನಸ್ಪಂದನ ಕಾರ್ಯಕ್ರಮ ರೂಪುಗೊಂಡಿದೆ ಎಂದರು.

ತಹಶೀಲ್ದಾರ್ ಡಾ.ನಾಗವೇಣಿ ಮಾತನಾಡಿ, ಜನಸ್ಪಂದನ ಕಾರ್ಯಕ್ರಮದಲ್ಲಿ ಐಪಿಜಿಆರ್‍ಎಸ್ ತಂತ್ರಾಂಶದ ಮೂಲಕ ನೀವು ನೀಡಿರುವ ಅರ್ಜಿಯನ್ನು ಸ್ವೀಕರಿಸಲಾಗುವುದು. ಹೀಗೆ ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಿಕೊಟ್ಟು ಸಮಸ್ಯೆಗೆ ಪರಿಹಾರ ದೊರಕಿಸಿಕೊಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.

ಜನಸ್ಪಂದನ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ: ಲೋಕಸಭೆ ಚುನಾವಣೆ ನಂತರ ಆಯೋಜಿಸಲಾದ ಜನ ಸ್ಪಂದನ ಕಾರ್ಯಕ್ರಮಕ್ಕೆ ಚಿಕ್ಕಾಲಘಟ್ಟ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ ದೊರಕಿತು. ಗ್ರಾಮಕ್ಕೆ ಆಗಮಿಸಿದ ಶಾಸಕ ವಿರೇಂದ್ರ ಪಪ್ಪಿ ಅವರನ್ನು ಹಸಿರು ತೋರಣದಿಂದ ಅಲಂಕೃತಗೊಂಡ ಜೋಡೆತ್ತಿನ ಬಂಡಿಯ ಮೇಲೆ ಗ್ರಾಮಕ್ಕೆ ಕರೆತರಲಾಯಿತು. ಪೂರ್ಣಕುಂಬ ಹೊತ್ತ ಅಂಗನಾಡಿ ಕಾರ್ಯಕರ್ತೆಯರು ಸ್ವಾಗತಕೋರಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಇದೇ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕ ಹಾಗೂ ಕಲ್ಯಾಣ ಮಂಡಳಿ ವತಿಯಿಂದ 25 ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‍ಪೋನ್, ಸಮವಸ್ತ್ರ, ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆ ವತಿಯಿಂದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಶಾಸಕ ವಿರೇಂದ್ರ ಪಪ್ಪಿ, ಗ್ರಾಮ ವಿಕಚೇತನರೊಬ್ಬರಿಗೆ ಸರ್ಕಾರದಿಂದ ನೀಡಲಾದ ಟ್ರೈಸಿಕಲ್ ಸ್ಕೂಟರ್ ದುರಸ್ಥಿಯನ್ನು ಸ್ವತಂ ಖರ್ಚಿನಿಂದ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು. ಜನಸ್ಪಂದನ ಕಾರ್ಯಕ್ರಮದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಹನುಮಂತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಗ್ರೇಡ್-2 ತಹಶೀಲ್ದಾರ್ ನಾಗರಾಜ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನರಸಿಂಹಮೂರ್ತಿ, ಆಲಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಂ.ನಾಗರಾಜ್, ಉಪಾಧ್ಯಕ್ಷೆ ನಿರ್ಮಲಮ್ಮ, ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement
Tags :
Chikkalaghatclean drinking water plantMLA K.C. Veerendra PuppyPromise of establishmentಚಿಕ್ಕಾಲಘಟ್ಟಶಾಸಕ ಕೆ.ಸಿ.ವೀರೇಂದ್ರ ಪಪ್ಪಿಶೀಘ್ರ ಶುದ್ಧ ಕುಡಿಯುವ ನೀರಿನ ಘಟಕಸ್ಥಾಪನೆಯ ಭರವಸೆ
Advertisement
Next Article